ಆದಿಕಾಂಡ 15
15
ದೇವರು ಅಬ್ರಾಮನೊಡನೆ ಮಾಡಿಕೊಂಡ ಒಡಂಬಡಿಕೆ
1ಈ ಸಂಗತಿಗಳಾದ ಮೇಲೆ, ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ಸಂದೇಶ ಬಂದಿತು. ದೇವರು ಅವನಿಗೆ, “ಅಬ್ರಾಮನೇ ಭಯಪಡಬೇಡ; ನಾನೇ ನಿನಗೆ ಗುರಾಣಿಯಾಗಿದ್ದೇನೆ. ನಾನು ನಿನಗೆ ದೊಡ್ಡ ಪ್ರತಿಫಲವನ್ನು ಕೊಡುತ್ತೇನೆ” ಎಂದು ಹೇಳಿದನು.
2ಅದಕ್ಕೆ ಅಬ್ರಾಮನು, “ದೇವರಾದ ಯೆಹೋವನೇ, ನೀನು ನನಗೆ ಏನೇ ಕೊಟ್ಟರೂ ನನಗೆ ಸಂತೋಷವಾಗುವುದಿಲ್ಲ. ಯಾಕೆಂದರೆ, ನನಗೆ ಮಗನೇ ಇಲ್ಲ. ಆದ್ದರಿಂದ ನಾನು ಸತ್ತಮೇಲೆ ನನ್ನ ಆಸ್ತಿಯೆಲ್ಲ ನನ್ನ ಸೇವಕನಾದ ದಮಸ್ಕದ ಎಲೀಯೆಜರನ ಪಾಲಾಗುವುದು” ಎಂದು ಹೇಳಿದನು. 3ಮತ್ತೆ ಅಬ್ರಾಮನು, “ನೀನು ನನಗೆ ಮಗನನ್ನೇ ಕೊಟ್ಟಿಲ್ಲ. ಆದ್ದರಿಂದ ನನ್ನ ಮನೆಯಲ್ಲಿ ಹುಟ್ಟಿದ ಸೇವಕನೊಬ್ಬನು ನನಗಿರುವುದನ್ನೆಲ್ಲ ಪಡೆದುಕೊಳ್ಳುವನು” ಎಂದು ಹೇಳಿದನು.
4ಆಗ ಯೆಹೋವನು ಅಬ್ರಾಮನಿಗೆ, “ನಿನ್ನ ಆಸ್ತಿಯನ್ನೆಲ್ಲ ಪಡೆದುಕೊಳ್ಳುವವನು ನಿನ್ನ ಸೇವಕನಲ್ಲ. ನೀನೇ ಮಗನನ್ನು ಪಡೆಯುವೆ; ನಿನ್ನ ಮಗನೇ ನಿನ್ನ ಆಸ್ತಿಯನ್ನೆಲ್ಲಾ ಪಡೆಯುವನು” ಎಂದು ಹೇಳಿದನು.
5ನಂತರ ದೇವರು ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು ಅವನಿಗೆ, “ಆಕಾಶದ ಕಡೆಗೆ ಕಣ್ಣೆತ್ತಿ ನಕ್ಷತ್ರಗಳನ್ನು ನೋಡು. ನೀನು ಲೆಕ್ಕ ಮಾಡಲಾರದಷ್ಟು ನಕ್ಷತ್ರಗಳಿವೆ. ಮುಂದಿನ ಕಾಲದಲ್ಲಿ ನಿನ್ನ ಕುಟುಂಬವು ಅದೇ ರೀತಿಯಲ್ಲಿರುವುದು” ಎಂದು ಹೇಳಿದನು.
6ಅಬ್ರಾಮನು ಯೆಹೋವನನ್ನು ನಂಬಿದನು. ಆ ನಂಬಿಕೆಯ ನಿಮಿತ್ತವೇ ಯೆಹೋವನು ಅಬ್ರಾಮನನ್ನು ನೀತಿವಂತನೆಂದು ಪರಿಗಣಿಸಿದನು. 7ಆತನು ಅಬ್ರಾಮನಿಗೆ, “ಯೆಹೋವನಾದ ನಾನು ನಿನ್ನನ್ನು ಕಲ್ದೀಯರ ಊರ್ ಪಟ್ಟಣದಿಂದ ಬರಮಾಡಿದೆನು. ನಿನಗೆ ಈ ದೇಶವನ್ನು ಕೊಡಬೇಕೆಂತಲೂ ನೀನು ಈ ದೇಶವನ್ನು ಹೊಂದಿಕೊಳ್ಳಬೇಕೆಂತಲೂ ನಾನು ನಿನ್ನನ್ನು ಬರಮಾಡಿದೆನು” ಎಂದು ಹೇಳಿದನು.
8ಅದಕ್ಕೆ ಅಬ್ರಾಮನು, “ಯೆಹೋವನೇ, ನನ್ನ ಒಡೆಯನೇ, ನನಗೆ ಈ ದೇಶವು ದೊರೆಯುತ್ತದೆಯೆಂದು ಖಚಿತಪಡಿಸಿಕೊಳ್ಳುವುದು ಹೇಗೆ?” ಎಂದು ಕೇಳಿದನು.
9ದೇವರು ಅಬ್ರಾಮನಿಗೆ, “ನಾವು ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳೋಣ. ಮೂರು ವರ್ಷದ ಒಂದು ಹಸುವನ್ನೂ ಮೂರು ವರ್ಷದ ಒಂದು ಆಡನ್ನೂ ಮತ್ತು ಮೂರು ವರ್ಷದ ಒಂದು ಟಗರನ್ನೂ ತೆಗೆದುಕೊಂಡು ಬಾ. ಇದಲ್ಲದೆ ಒಂದು ಬೆಳವಕ್ಕಿಯನ್ನೂ ಒಂದು ಪಾರಿವಾಳವನ್ನೂ ತೆಗೆದುಕೊಂಡು ಬಾ” ಎಂದು ಹೇಳಿದನು.
10ಅಬ್ರಾಮನು ದೇವರಿಗೋಸ್ಕರ ಅವುಗಳನ್ನೆಲ್ಲ ತೆಗೆದುಕೊಂಡು ಬಂದನು. ಅಬ್ರಾಮನು ಅವುಗಳನ್ನು ಕತ್ತರಿಸಿ ಎರಡೆರಡು ಹೋಳು ಮಾಡಿದನು. ಆಮೇಲೆ ಅಬ್ರಾಮನು ತುಂಡಿಗೆ ತುಂಡನ್ನು ಎದುರಾಗಿಟ್ಟನು. ಅಬ್ರಾಮನು ಪಕ್ಷಿಗಳನ್ನು ಮಾತ್ರ ಎರಡೆರಡು ಹೋಳು ಮಾಡಲಿಲ್ಲ. 11ಸ್ವಲ್ಪ ಸಮಯದ ನಂತರ, ದೊಡ್ಡ ಪಕ್ಷಿಗಳು ಆ ಪ್ರಾಣಿಗಳ ಮಾಂಸವನ್ನು ತಿನ್ನಲು ಹಾರಿ ಬಂದವು. ಆದರೆ ಅಬ್ರಾಮನು ಅವುಗಳನ್ನು ಓಡಿಸಿಬಿಟ್ಟನು.
12ಸಾಯಂಕಾಲವಾಯಿತು, ಸೂರ್ಯ ಮುಳುಗತೊಡಗಿದಾಗ ಅಬ್ರಾಮನಿಗೆ ಗಾಢ ನಿದ್ರೆ ಬಂದಿತು. ಅವನು ನಿದ್ರೆ ಮಾಡುತ್ತಿರುವಾಗ ಕಾರ್ಗತ್ತಲಾಯಿತು. 13ಆಗ ಯೆಹೋವನು ಅಬ್ರಾಮನಿಗೆ, “ನಿನಗೆ ಈ ವಿಷಯಗಳು ತಿಳಿದಿರಬೇಕು. ನಿನ್ನ ಸಂತತಿಯವರು ಪರದೇಶಿಯರಾಗಿ ತಮ್ಮದಲ್ಲದ ದೇಶದಲ್ಲಿ ವಾಸಮಾಡುವರು. ಅಲ್ಲಿನ ಜನರು ಅವರನ್ನು ಗುಲಾಮರನ್ನಾಗಿ ಮಾಡಿಕೊಳ್ಳುವರು. ಅಲ್ಲಿ ಅವರು ನಾನೂರು ವರ್ಷಗಳವರೆಗೆ ಬಾಧೆಪಡುವರು. 14ಆದರೆ ನಾನೂರು ವರ್ಷಗಳಾದ ಮೇಲೆ ಅವರ ಮೇಲೆ ದೊರೆತನ ಮಾಡಿದ ಆ ದೇಶವನ್ನು ನಾನು ದಂಡಿಸುವೆನು; ನಿನ್ನ ಜನರು ಆ ದೇಶವನ್ನು ಬಿಟ್ಟು ಹೊರಡುವರು. ನಿನ್ನ ಜನರು ಅದನ್ನು ಬಿಡುವಾಗ ತಮ್ಮೊಡನೆ ಸಂಪತ್ತುಗಳನ್ನು ತೆಗೆದುಕೊಂಡು ಹೋಗುವರು.
15“ನೀನು ತುಂಬಾ ಮುದುಕನಾಗುವ ತನಕ ಜೀವಿಸಿ ಸಮಾಧಾನದಿಂದ ಸಾಯುವೆ; ನಿನ್ನನ್ನು ನಿನ್ನ ಕುಟುಂಬದವರೊಡನೆ ಸಮಾಧಿ ಮಾಡುವರು. 16ನಾಲ್ಕು ತಲೆಮಾರುಗಳ ನಂತರ ನಿನ್ನ ಜನರು ಈ ನಾಡಿಗೆ ಹಿಂತಿರುಗುವರು. ಆ ಕಾಲದಲ್ಲಿ ನಿನ್ನ ಜನರು ಅಮೋರಿಯರನ್ನು ಸೋಲಿಸುವರು. ಇಲ್ಲಿ ವಾಸಿಸುತ್ತಿರುವ ಅಮೋರಿಯರನ್ನು ನಿನ್ನ ಜನರ ಮೂಲಕ ನಾನೇ ಶಿಕ್ಷಿಸುವೆನು. ಇದು ಮುಂದೆ ನಡೆಯುವ ಸಂಗತಿ. ಯಾಕೆಂದರೆ ಆ ಸಮಯದಲ್ಲಿ ಅಮೋರಿಯರು ಅಂಥ ಶಿಕ್ಷೆ ಅನುಭವಿಸುವಷ್ಟು ಕೆಟ್ಟವರಾಗಿರಲಿಲ್ಲ” ಎಂದು ಹೇಳಿದನು.
17ಸೂರ್ಯನು ಮುಳುಗಿದ ಮೇಲೆ ತುಂಬ ಕತ್ತಲಾಯಿತು. ಕಡಿದುಹಾಕಿದ್ದ ಪ್ರತಿಯೊಂದು ಪ್ರಾಣಿಗಳ ದೇಹದ ಎರಡೆರಡು ಹೋಳುಗಳು ಇನ್ನೂ ನೆಲದ ಮೇಲೆ ಇದ್ದವು. ಆ ಸಮಯದಲ್ಲಿ ಇದ್ದಕ್ಕಿದ್ದಂತೆ ಹೊಗೆ ಮತ್ತು ಬೆಂಕಿಗಳಿಂದ ಕೂಡಿದ ದೀವಿಟಿಗೆಯು ಈ ತುಂಡುಗಳ ನಡುವೆ ಹಾದುಹೋಯಿತು.
18ಆದ್ದರಿಂದ ಅಂದು ಯೆಹೋವನು ಒಂದು ವಾಗ್ದಾನವನ್ನು ಮಾಡಿ ಅಬ್ರಾಮನೊಡನೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಯೆಹೋವನು ಅವನಿಗೆ, “ನಾನು ನಿನ್ನ ಸಂತತಿಯವರಿಗೆ ಈ ನಾಡನ್ನು ಕೊಡುವೆನು. ನಾನು ಅವರಿಗೆ ಈಜಿಪ್ಟ್ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಇರುವ ನಾಡನ್ನು ಕೊಡುವೆನು. 19ಇದು ಕೇನಿಯರ, ಕೆನಿಜೀಯರ, ಕದ್ಮೋನಿಯರ, 20ಹಿತ್ತಿಯರ, ಪೆರಿಜೀಯರ, ರೆಷಾಯರ, 21ಅಮೋರಿಯರ, ಕಾನಾನ್ಯರ, ಗಿರ್ಗಾಷಿಯರ ಮತ್ತು ಯೆಬೂಸಿಯರ ನಾಡು” ಎಂದು ಹೇಳಿದನು.
Pašlaik izvēlēts:
ಆದಿಕಾಂಡ 15: KERV
Izceltais
Dalīties
Kopēt

Vai vēlies, lai tevis izceltie teksti tiktu saglabāti visās tavās ierīcēs? Reģistrējieties vai pierakstieties
Kannada Holy Bible: Easy-to-Read Version
All rights reserved.
© 1997 Bible League International